![ಶರದ್ ಪವಾರ್ಗೆ ಬೆದರಿಕೆ ಸಂದೇಶ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸುಪ್ರಿಯಾ ಸುಳೆ](https://assets-news-bcdn.dailyhunt.in/cmd/resize/768x512_90/fetchdata16/images/68/0d/49/680d49c3a285d34b43729391cf6f66bda035bed1032665e875ae504e5195a807.webp)
ಶರದ್ ಪವಾರ್ಗೆ ಬೆದರಿಕೆ ಸಂದೇಶ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸುಪ್ರಿಯಾ ಸುಳೆ
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ವಾಟ್ಸ್ಆಯಪ್ ನಲ್ಲಿ ಬೆದರಿಕೆ ಸಂದೇಶ ಬಂದಿದ್ದು, ಈ ಕುರಿತು ಸಂಸದೆ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಮುಂಬೈ : ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆಯೇ ಆತಂಕಕಾರಿ ಸುದ್ದಿಯೊಂದು ಕೇಳಿಬರುತ್ತಿದೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ವೆಬ್ಸೈಟ್ವೊಂದರ ಮೂಲಕ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ತಂದೆಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಸರ್ಕಾರವೇ ಹೊಣೆ. ವೆಬ್ಸೈಟ್ನಿಂದ ಬೆದರಿಕೆ ಹಾಕಲಾಗಿದೆ. ಶರದ್ ಪವಾರ್ ಅವರ ವಾಟ್ಸ್ಆಯಪ್ಗೂ ಬೆದರಿಕೆ ಮೆಸೇಜ್ಗಳು ಬಂದಿವೆ. ಈ ಕುರಿತು ಗೃಹ ಸಚಿವರು ಗಮನಹರಿಸಿ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
“ಗೃಹ ಇಲಾಖೆಯ ಉಸ್ತುವಾರಿ ಹೊತ್ತಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಪರಿಶೀಲಿಸಬೇಕು. ನಾನು ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಬಂದಿದ್ದೇನೆ, ಪೊಲೀಸರಿಗೆ ಬೆದರಿಕೆಯ ಸ್ಕ್ರೀನ್ಶಾಟ್ಗಳ ಪ್ರಿಂಟ್ಔಟ್ಗಳನ್ನು ಸಹ ಸಲ್ಲಿಸಲಾಗಿದೆ. ಇಂತಹ ಕೀಳು ಮಟ್ಟದ ರಾಜಕೀಯ ನಿಲ್ಲಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ನಗರದ ದಕ್ಷಿಣ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿರುವ ಶರದ್ ಪವಾರ್ಗೆ ಕೊಲೆ ಬೆದರಿಕೆಗಳು ಬಂದಿದ್ದವು.
ರಾಜ್ಯದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ? : ಕಳೆದ ಕೆಲ ದಿನಗಳಿಂದ ಕೊಲ್ಹಾಪುರ, ಬೀಡು, ಅಹಮದ್ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ವಿರೋಧ ಪಕ್ಷಗಳ ನಾಯಕರು ಪ್ರಶ್ನೆ ಎತ್ತುತ್ತಿದ್ದಾರೆ. ಈ ಗಲಭೆಗಳನ್ನು ಉದ್ದೇಶಪೂರ್ವಕವಾಗಿ ಮತ್ತು ಚುನಾವಣೆಯಲ್ಲಿ ಯಶಸ್ಸು ಗಳಿಸಲು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.
ನೀಲೇಶ್ ರಾಣೆ ಟ್ವೀಟ್: ಇನ್ನೊಂದೆಡೆ, “ಚುನಾವಣೆ ಹತ್ತಿರ ಬಂದಾಗ ಪವಾರ್ ಸಾಹೇಬರಿಗೆ ಮುಸ್ಲಿಂ ಸಮುದಾಯದ ಚಿಂತೆ ಕಾಡುತ್ತದೆ. ಕೆಲವೊಮ್ಮೆ ಶರದ್ ಪವಾರ್ ಅವರು ಔರಂಗಜೇಬನ ಪುನರ್ಜನ್ಮ ಎಂದು ತೋರುತ್ತದೆ” ಅಂತಾ ಬಿಜೆಪಿ ಮುಖಂಡ ನೀಲೇಶ್ ರಾಣೆ ಟ್ವೀಟ್ ಮಾಡಿದ್ದಾರೆ. ಈ ಕುರಿತು, ಆಕ್ರೋಶ ವ್ಯಕ್ತಪಡಿಸಿರುವ ಎನ್ಸಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.