ಗದಗ ಸೆಪ್ಟೆಂಬರ್: ಪ್ರಜೆಯೇ ನಿಜವಾದ ಪ್ರಭು. ಪ್ರಜೆಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಕಾರ್ಯವಾಗಲಿ. ಅನವಶ್ಯಕ ಅಲೆದಾಟ ತಪ್ಪಿಸುವುದೇ ಜನತಾದರ್ಶನ ಕಾರ್ಯಕ್ರಮದ ಧ್ಯೇಯೋದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಜಿಲ್ಲಾಡಳಿತದಿಂದ ಏರ್ಪಡಿಸಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಒಂದು ನಿಮಿಷದ ಕೆಲಸ ಇದ್ದರೂ ಸಹ ಒಂದು ತಿಂಗಳುಗಟ್ಟಲೇ ಅಲೆದಾಡಿಸುವುದು ಜನರಿಗೆ ವಿನಾಕಾರಣ ನೋವು ವಿಳಂಬ ದ್ರೋಹ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರವೃತ್ತಿ ಸಂಪೂರ್ಣವಾಗಿ ನಿಲ್ಲಿಸಬೇಕು. ಜನರ ಸಮೀಪ ತೆರಳಿ ಅವರ ಸಮಸ್ಯೆಗಳನ್ನು ಈಡೇರಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಕಳೆದ ವರ್ಷ ಸೆಪ್ಟೆಂಬರ್ 30 ರಂದು ಮಾಡಲಾಗಿತ್ತು. ಅಂದು ಸಾರ್ವಜನಿಕರು ಅನೇಕ ತರಹದ ಅಹವಾಲುಗಳನ್ನು ಹೊತ್ತು ಆಗಮಿಸಿ ಒಟ್ಟು 920 ಅರ್ಜಿಗಳನ್ನು ಸಲ್ಲಿಸಿದ್ದರು. ಹಲವಾರು ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಲಲಾಗಿದೆ. 830 ಅಹವಾಲುಗಳಿಗೆ ತಾರ್ಕಿಕ ಅಂತ್ಯ ನೀಡಲಾಗಿದೆ. ಬಾಕಿ ಉಳಿದ 83 ಅಹವಾಲುಗಳಲ್ಲಿ 40 ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಉಳಿದ ಅಹವಾಲುಗಳು ವೈಯಕ್ತಿಕ ಹಾಗೂ ಅಪೂರ್ಣ ದಾಖಲೆಗಳನ್ನು ಒಳಗೊಂಡಿವೆ. ಮತ್ತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದರಿಮದ ಪರಿಹಾರ ಪ್ರಯತ್ನ ವಿಳಂಬವಾಗಿದೆ ಎಂದರು.ಅವುಗಳ ಪರಿಹಾರಕ್ಕೂ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದರು.

ಇದು ಎರಡನೇ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವಾಗಿದ್ದು ಕಾರ್ಯಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಜನಸಾಮಾನ್ಯರಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿತ್ತು. ಗದಗ ತಾಲೂಕಿನ 44 ಅಹವಾಲು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 116 ಅಹವಾಲುಗಳು ನೊಂದಣಿಯಾಗಿವೆ. ಅಲ್ಲದೇ ನೇರವಾಗಿಯೂ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಪ್ರಯತ್ನಿಸಲಿದ್ದಾರೆ ಎಂದು ತಿಳಿಸಿದರು.

ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಗದಗ ತಾಲೂಕು ಕಚೇರಿಯಲ್ಲಿರುವ ಬಾಕಿ ಇರುವ ಅರ್ಜಿಗಳ ವಿಚಾರಣೆ ಕೈಗೊಳ್ಳುವ ಮೂಲಕ ಪರಿಹಾರಕ್ಕೆ ಯತ್ನಿಸಲಾಗುವುದು. ಜೊತೆಗೆ ಜಿಲ್ಲೆಯ ಇನ್ನೊಂದು ತಾಲೂಕು ಕಚೇರಿಯಲ್ಲಿ ಬಾಕಿ ಇರುವ ಅರ್ಜಿಗಳಿಗೂ ಸಹ ಈ ಕಾರ್ಯಕ್ರಮದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತಾದರ್ಶನ ಕಾರ್ಯಕ್ರಮದ ಬಗ್ಗೆ ವಿಶೇಷ ಗಮನಹರಿಸುತ್ತಾರೆ. ಜಿಲ್ಲೆಗಳಲ್ಲಿ ಜರುಗುವ ಜನತಾದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಿಯಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಉತ್ಸುಕರಾಗಿದ್ದಾರೆ ಎಂದು ನುಡಿದರು

Leave a Reply

Your email address will not be published. Required fields are marked *

Latest News