ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳು ಸೇರಿ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಕರ್ನಾಟಕ ಹೈಕೋರ್ಟ್
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ(HD Kumaraswamy) ಹಾಗೂ ಮದ್ದೂರು ಶಾಸಕ ಡಿ. ಸಿ. ತಮ್ಮಣ್ಣ(DC Thammanna) ಮತ್ತಿತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣಕ್ಕೆ (Land Encroachment) ಸಂಬಂಧಿಸಿ ಅಧಿಕಾರಿಗಳು ಒತ್ತುವರಿ ತೆರವುಗೊಳಿಸದ ಹಿನ್ನೆಲೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ವಿರುದ್ಧದ ಬಿಡದಿಯ ಕೇತಗಾನಹಳ್ಳಿ ಬಳಿ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಯಿತು.
ಈ ಹಿಂದೆಯೇ ಒತ್ತುವರಿ ತೆರವಿಗೆ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗಿತ್ತು. ಆದ್ರೆ ತಾವು ಸರ್ಕಾರಿ ಜಮೀನು ಒತ್ತುವರಿ ಮಾಡಿಲ್ಲ. ಮಂಜೂರಾದ ಭೂಮಿ ಖರೀದಿ ಮಾಡಿದ್ದೇವೆಂದು ನೋಟಿಸ್ಗೆ ಉತ್ತರಿಸಿದ್ದಾರೆ. ಪರಿಶೀಲನೆ ವೇಳೆ ದಾಖಲೆ ನಾಶವಾಗಿರುವುದು ಪತ್ತೆಯಾಗಿದೆ.
ಹಿಂದಿನ ಆದೇಶಗಳ ಅನುಪಾಲನಾ ವರದಿಗೆ ಕಾಲಾವಕಾಶ ಕೋರಿ ಸರ್ಕಾರಿ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಸರ್ಕಾರಿ ವಕೀಲರ ಹೇಳಿಕೆಉನ್ನು ಒಪ್ಪದ ಹೈಕೋರ್ಟ್, ದಾಖಲೆಗಳು ನಾಶವಾಗಿವೆ ಎಂದರೆ ಏನರ್ಥ? ಭೂಮಿ, ದಾಖಲೆಗಳಿಗೆ ಸರ್ಕಾರವೇ ಕಸ್ಟೋಡಿಯನ್ ಆಗಿರುತ್ತದೆ. ದಾಖಲೆಗಳು ನಾಶವಾಗಿವೆ ಎಂದು ಹೇಳಿದರೆ ಒಪ್ಪಲಾಗದು. ಈ ಪ್ರಕರಣದಲ್ಲಿ ಸರ್ಕಾರದ ಎಷ್ಟು ಜಮೀನು ಒತ್ತುವರಿಯಾಗಿದೆ. ಎಷ್ಟು ಜಮೀನನ್ನು ರಾಜ್ಯ ಸರ್ಕಾರ ಮತ್ತೆ ವಶಕ್ಕೆ ಪಡೆದಿದೆ. ಈ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.
ಏನಿದು ಪ್ರಕರಣ?
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳು ಸೇರಿ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಿದ್ದರು. ಲೋಕಾಯುಕ್ತರ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.